ಹುಬ್ಬಳ್ಳಿ : ಸಿಟಿ ರವಿ ಆ ರೀತಿ ಹೇಳಿಲ್ಲ ಎನ್ನುತ್ತಾರೆ. ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು. ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಸ್ಪೀಕರ್ ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ. ಸಿಟಿ ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಎಂದು ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.
ಪರಮೇಶ್ವರ್ ಅಸಮರ್ಥ ಗೃಹ ಸಚಿವ ಎಂಬ ಜೋಶಿ ಲೇವಡಿ ವಿಚರ‍್ವಾಗಿ ಪ್ರತಿಕ್ರಿಯಿಸಿದ ಅವರು, ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Leave a Reply

Your email address will not be published. Required fields are marked *