ಮಂಡ್ಯ : ಗ್ಯಾರಂಟಿ ಯೋಜನೆಯಿಂದ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಸ್ತೆ ಗುಂಡಿ ಮುಚ್ಚೋಕು ಸರ್ಕಾರದ ಬಳಿ ದುಡ್ಡಿಲ್ಲ ಎಂದು ಕೆ.ಆರ್ ಪೇಟೆ ಶಾಸಕ ಹೆಚ್.ಟಿ ಮಂಜು ವ್ಯಂಗ್ಯವಾಡಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಟ್ಟ ಸಮಯದಲ್ಲಿ ಶಾಸಕನಾಗಿದ್ದೇನೆ. ಕ್ಷೇತ್ರದಲ್ಲಿ ಕನಿಷ್ಠ ಪ್ರಮಾಣದ ಕೆಲಸವನ್ನೂ ಮಾಡಲು ಆಗುತ್ತಿಲ್ಲ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಅನುದಾನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಕೆರೆ ಕಟ್ಟೆ ದುರಸ್ಥಿಗೂ ಸರ್ಕಾರದ ಬಳಿ ಹಣ ಇಲ್ಲ. ರಸ್ತೆ ಗುಂಡಿ ಮುಚ್ಚುವುದಕ್ಕೂ ಹಣ ಕೊಡುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.
ಅನುದಾನಕ್ಕಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಕೆರೆ ಕಟ್ಟೆಗಳು ಒಡೆದು ಮೂರ್ನಾಲ್ಕು ವರ್ಷಗಳಾಗಿವೆ. ಮಳೆಯಿಂದ ಒಡೆದ ಕೆರೆ ಏರಿ ದುರಸ್ತಿ ಮಾಡಿಸಲು ಸರ್ಕಾರ ಹಣ ನೀಡುತ್ತಿಲ್ಲ. ಈ ಬಗ್ಗೆ ಅಧಿವೇಶನದಲ್ಲೂ ಮಾತನಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಅವರಿಗೆ ನೇರವಾಗಿ ಮನವಿ ಮಾಡಿಕೊಂಡಿದ್ದೇನೆ. ಮನವಿ ಸಲ್ಲಿಸಿದಾಗ ಸ್ಪಂದಿಸುವ ಭರವಸೆ ನೀಡಿದ್ದರು. ಆದರೆ ಈವರೆಗೂ ಹಣ ಬಿಡುಗಡೆಯಾಗಿಲ್ಲ ಎಂದು ಹೇಳಿದರು.